ನವೆಂಬರ್ 22 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (CM Siddaramaih) ನೇತೃತ್ವದಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಗತಿ ಪರಿಶೀಲನ ಸಭೆ ನಡೆದಿದೆ. ಈ ಸಭೆಯಲ್ಲಿ ತಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ (Guarantee Schemes) ಕರ್ನಾಟಕದ ಕೋಟ್ಯಾಂತರ ಕುಟುಂಬಗಳಿಗೆ ಅನುಕೂಲವಾಗುತ್ತಿದೆ.
ಮತ್ತು ಇಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಕರ್ನಾಟಕವು ಇಂದು ಆಡಳಿತದಲ್ಲಿ ದೇಶಕ್ಕೆ ಮಾದರಿ (Karnataka model) ಆಗಿದೆ ಎನ್ನುವ ಇನ್ನಿತರ ವಿಚಾರಗಳ ಬಗ್ಗೆ ಮಾತನಾಡಿದರು. ಜಾತಿ, ಧರ್ಮ, ಲಿಂಗ ಬೇಧವಿಲ್ಲದೆ ಸರ್ವರನ್ನೂ ಒಳಗೊಳ್ಳುವ ಸಮಾನ ಅವಕಾಶಗಳ ಸರ್ವತೋಮುಖ ಪ್ರಗತಿಯ ನಾಡು ಕಟ್ಟುವ ನಮ್ಮ ಕಾರ್ಯಕ್ಕೆ ನಾಡಿನ ಜನತೆಯ ಬೆಂಬಲವಿರಲಿ ಎಂದು ನಾಡಿನ ಜನತೆಯಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು.
ಸಭೆಯಲ್ಲಿ ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯ ನಿರ್ವಹಣೆ ಮತ್ತು ಕುಂದು ಕೊರತೆಗಳ ಬಗ್ಗೆ ಚರ್ಚೆ ಮಾಡಲಾಯಿತು. ಸಭೆಯಲ್ಲಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು (Lakshmi Hebbalkar) ರವರು ಪ್ರಸ್ತುತ ಗೃಹಲಕ್ಷ್ಮಿ ಯೋಜನೆಯಲ್ಲಿ ಇರುವ ಪ್ರಮುಖ ಸಮಸ್ಯೆಗಳ ಬಗ್ಗೆ ಮತ್ತು ಅದರ ನಿವಾರಣೆಗೆ ಕ್ರಮ ಕೈಗೊಂಡಿರುವ ಬಗ್ಗೆ ವಿವರ ನೀಡಿದರು.
ಇನ್ನು ಕೂಡ ಅರ್ಜಿ ಸಲ್ಲಿಸಿರುವ 2 ಲಕ್ಷ ಮಹಿಳೆಯರ ಖಾತೆಗೆ ಹಣ ತಲುಪಿಲ್ಲ, ಅಂಗನವಾಡಿ ಸಹಾಯಕರು ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಬ್ಯಾಂಕ್ ಖಾತೆ ಸಮಸ್ಯೆಗಳನ್ನು ಎದುರಿಸುತ್ತಿರುವ ಮಹಿಳೆಯರ ಜೊತೆ ಬ್ಯಾಂಕಿಗೆ ಹೋಗಿ ಸಮಸ್ಯೆ ಪರಿಹಾರ ಮಾಡಿಕೊಡುತ್ತಿದ್ದಾರೆ. ಇಷ್ಟು ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ಮತ್ತು ಇಲಾಖೆ ಅಧಿಕಾರಿಗಳಿಗೆ ನೀಡಿದರು.
ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ (Grama Panchayath level) ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಇರುವ ಸಮಸ್ಯೆ ಪರಿಹಾರಕ್ಕಾಗಿ ಗೃಹಲಕ್ಷ್ಮಿ ಅದಾಲತ್ (Gruhalakshmi Adalath) ನಡೆಸಬೇಕು. ಡಿಸೆಂಬರ್ ಒಳಗೆ ಬಾಕಿ ಉಳಿದ ಫಲಾನುಭವಿಗಳಿಗೆಲ್ಲಾ ಹಣ ತಲುಪಿಸಬೇಕು ಮತ್ತು ಯಾರೆಲ್ಲಾ ಇನ್ನೂ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿಲ್ಲ ಅವರನ್ನೂ ಕೂಡ ಗುರುತಿಸಿ ಅವರಿಗೂ ಯೋಜನೆ ತಲುಪುವಂತೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಈವರೆಗೆ ಇರುವ ಮಾಹಿತಿ ಪ್ರಕಾರ ನವೆಂಬರ್ ತನಕ 1.17 ಕೋಟಿ ಮಹಿಳಾ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆ ಸಹಾಯಧನ ಪಡೆಯಲು ನೋಂದಣಿಯಾಗಿದ್ದಾರೆ. ಆದರೆ ಆರಂಭದಲ್ಲಿ ಇದರ 80% ಮಹಿಳೆಯರು ಮಾತ್ರ ಹಣ ಪಡೆದಿದ್ದರು ಅನಂತರ ಸಮಸ್ಯೆ ತಿದ್ದುಪಡಿ ಮಾಡಿಕೊಂಡ ಮೇಲೆ 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ.
ಇನ್ನೂ 2 ಲಕ್ಷ ಫಲಾನುಭವಿಗಳಿಗೆ ಹಣ ತಲುಪಿಸಲು ಸಮಸ್ಯೆ ಇದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಹಾಗಾಗಿ ಗೃಹಲಕ್ಷ್ಮಿ ಅದಾಲತ್ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಸಭೆಯಲ್ಲಿ ಸೂಚನೆ ಕೊಟ್ಟಿದ್ದಾರೆ.
ಈ ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಿ.ಸಿ.ಪ್ರಕಾಶ್ ನಿರ್ದೇಶಕಿ ಎಂ.ಎಸ್. ಅರ್ಚನಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ.